ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ!

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದಿನ 24 ಗಂಟೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ರಾಮನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಹಾಗೂ ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹೇಳಿದೆ.

ಇನ್ನು ಕಳೆದ ಕೆಲ ದಿನಗಳಿಂದ ರಾಜ್ಯದ ಹಲವೆಡೆ ವರುಣನ ಆರ್ಭಟ ಜೋರಾಗಿದ್ದು, ಹಲವೆಡೆ ಭಾರೀ ಅವಾಂತರವೇ ಸೃಷ್ಟಿಯಾಗಿದೆ. ಲವೆಡೆ, ಜನ-ಜಾನುವಾರುಗಳ ಪ್ರಾಣಹಾನಿ ಕೂಡ ಸಂಭವಿಸಿದೆ.

ರಾಜ್ಯದಲ್ಲಿ ಭಾರೀ ಮಳೆ

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕಾಗಿದ್ದು, ಇನ್ನೂ ಒಂದು ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮೇ 12ರಿಂದ ಮೇ 16ರವೆರೆಗೆ ವ್ಯಾಪಕ ಮಳೆಯಾಗಲಿದ್ದು. ಮೇ 17 ಮತ್ತು 18ರಂದು ಸಾಧಾರಣ ಮಳೆಯಾಗಲಿದೆ. ಮೇ 13ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇದನ್ನೂ ಓದಿ:- ರಾಜ್ಯದಲ್ಲಿ ಡೆಂಘಿ ಜ್ವರ …….. ಎಚ್ಚರ ಎಚ್ಚರ!

ಮೇ 12ರಂದು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮೇ 13 ಮತ್ತು 14ರಂದು ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಒಂದು ವಾರ ಸಾಧಾರಣ ಮಳೆಯಾಗಲಿದೆ. ಮೇ 12ರಂದು ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆ, ಮೇ 13 ಮತ್ತು 14ರಂದು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಾದ್ಯಂತ ಶನಿವಾರ ಸಂಜೆ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಭರ್ಜರಿ ಮಳೆಯಾಗಿದೆ. ಸಂಜೆ 3.30ರ ಬಳಿಕ ಸುಮಾರು 2 ಗಂಟೆ ಕಾಲ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಉತ್ತಮ ಮಳೆಯಾಗಿದೆ.
ಸಿಡಿಲು ಮಿಂಚು ಸಹಿತ ಗಾಳಿ ಮಳೆಗೆ ದೊಡ್ಡತೋಟ-ಮರ್ಕಂಜ ರಸ್ತೆಯ ಬೆಟ್ಟ ಎಂಬಲ್ಲಿ ರಸ್ತೆಗೆ ಮರ ಬಿದ್ದಿದೆ. ಪರಿಣಾಮ ವಿದ್ಯುತ್‌ ಕಂಬ ಮುರಿದಿದ್ದು, ಸಂಚಾರ ವ್ಯತ್ಯಯಗೊಂಡಿದೆ. ಸೂಂತೋಡು ಎಂಬಲ್ಲಿ ಮರವೊಂದು ರಸ್ತೆಗೆ ಬಿದ್ದು ನಾಲ್ಕು ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ.

ಬೆಳ್ತಂಗಡಿ ತಾಲೂಕಿನಲ್ಲಿ ಶನಿವಾರ ಗುಡುಗು, ಸಿಡಿಲಿನ ಜತೆ ಮಳೆಯಾಗಿದೆ. ಈ ವೇಳೆ ಚಾರ್ಮಾಡಿಯ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆಯೂ ನಡೆಯಿತು. ಸಿಡಿಲು ಬಡಿದು ಬೆಂಕಿ ಉಂಟಾಗಿರುವ ಶಂಕೆ ಇದ್ದು, ಉತ್ತಮ ಮಳೆಯಾದ ಕಾರಣ ಅರಣ್ಯ ಭಾಗಕ್ಕೆ ಯಾವುದೇ ಹಾನಿ ಉಂಟಾಗಿಲ್ಲ ಎಂದು ತಿಳಿದು ಬಂದಿದೆ.

Leave a Comment