ರವಿ-ಲಕ್ಷ್ಮಿ ಬಿಕ್ಕಟ್ಟು ಮತ್ತೊಂದು ಹಂತಕ್ಕೆ

ರವಿ-ಲಕ್ಷ್ಮಿ ಬಿಕ್ಕಟ್ಟು ಮತ್ತೊಂದು ಹಂತಕ್ಕೆ

ಬೆಂಗಳೂರು: ಸಿಐಡಿ ಗೆ ಕೊಟ್ಟ ಸರ್ಕಾರ ರಾಜಭವನಕ್ಕೆ ಬಿಜೆಪಿ ನಿಯೋಗ ನ್ಯಾಯಾಂಗ ತನಿಖೆಗೆ ಒತ್ತಾಯ ಇದು ಬಫುನ್ ಸರ್ಕಾರ

ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ನಡುವಿನ ಸಂಘರ್ಷ ಮತ್ತೊಂದು ಹಂತ ತಲುಪಿದ್ದು, ಸರ್ಕಾರವು ಈ ಪ್ರಕರಣವನ್ನು ಸಿಐಡಿಗೆ ವಹಿಸುವ ಮೂಲಕ ಪ್ರತಿಷ್ಠೆಯಾಗಿ ಪರಿಗಣಿಸಿದೆ. ಅದೇ ರೀತಿ ಬಿಜೆಪಿಯು ರಾಜ್ಯಪಾಲರ ಮಧ್ಯ ಪ್ರವೇಶ ಬಯಸಿ ರಾಜಭವನದ ಕದತಟ್ಟಿದೆ.
ಇನ್ನೊಂದು ಮಗ್ಗುಲಲ್ಲಿ ಲಕ್ಷ್ಮೀ ಹೆಬ್ಬಾಳ್ಳರ್ ಸರಣಿ ಸಂದರ್ಶನ ನೀಡಿದ್ದು, ಸಿ.ಟಿ.ರವಿ ಅವರನ್ನು ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಬರುವಂತೆಯೂ ಸವಾಲು ಹಾಕಿದ್ದಾರೆ. ಒಟ್ಟಾರೆ ಇಡೀ ಪ್ರಕರಣ ಸೇರಿಗೆ ಸವ್ವಾಸೇರು ಎಂಬಂತೆ ಜಟಿಲವಾಗುತ್ತಲೇ ಮುಂದುವರಿದಿದೆ.

ಸಿಐಡಿಗೆ ಹೊಣೆ: ಸಿ.ಟಿ. ರವಿ ತಾವು ‘ಆ ರೀತಿ’ ಹೇಳಿಲ್ಲ ಎನ್ನುತ್ತಾರೆ, ಲಕ್ಷ್ಮೀ ಹೆಬ್ಬಾಳ್ಳ‌ರ್ ಪಕ್ಕದಲ್ಲಿದ್ದವರು ‘ಆ ಮಾತು’ ಆಡಿದ್ದಾರೆ ಎಂದು ಹೇಳುತ್ತಾರೆ. ಹೀಗಾಗಿ ಎಲ್ಲ ವಿಚಾರಗಳ ಬಗ್ಗೆ ತನಿಖೆ ಆಗಲೆಂದೇ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಈ ಮೂಲಕ ಸಿ.ಟಿ.ರವಿ ವಿರುದ್ಧ ದಾಖಲಾಗಿದ್ದ ಪ್ರಕರಣ ಸಿಐಡಿಗೆ ತಕ್ಷಣವೇ ವರ್ಗವಾಗಲಿದ್ದು, ವಿಶೇಷ ತನಿಖಾ ತಂಡ ವಿಚಾರಣೆಗೆ ಆದ್ಯತೆ ನೀಡಲಿದೆ. ಶೀಘ್ರವೇ ದಾಖಲೆ ಸಂಗ್ರಹ ಮಾಡುವುದು ಹಾಗೂ ನಂತರದ ಹಂತದಲ್ಲಿ ಸಿ.ಟಿ.ರವಿ ಅವರನ್ನು ವಿಚಾರಣೆಗೆ ಕರೆಸುವ ಸಾಧ್ಯತೆ ಇದೆ.

ರಾಜ್ಯಪಾಲರಿಗೆ ದೂರು: ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ರಕ್ಷಣೆ ನೀಡುವಂತೆ ಕೋರಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಬಿಜೆಪಿ ನಿಯೋಗ ಮಂಗಳವಾರ ಸಂಜೆ ಮನವಿ ಸಲ್ಲಿಸಿದೆ. ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಎನ್.ರವಿಕುಮಾರ್ ಮತ್ತಿತರರಿದ್ದ ತಂಡ, ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಲು ಸರ್ಕಾರಕ್ಕೆ ಸೂಚನೆ ಕೊಡುವಂತೆ ಕೋರಿತು.

ಇದನ್ನೂ ಓದಿ:  ದೈತ್ಯ ಅಲ್ಲಿ ಸಹೋದರರ ನಡುವೆ ಅಣುವಿನಂತೆ ಕಂಡ ಗಾಂಧಿ!

ಆಣೆ ಪ್ರಮಾಣ: ಸಿ.ಟಿ ರವಿ ಅವರು ಆ ರೀತಿ ಹೇಳಿಲ್ಲ ಅನ್ನೋದಾದರೆ,
ಧರ್ಮಸ್ಥಳಕ್ಕೆ ಬಂದು ಆಣೆ, ಪ್ರಮಾಣ ಮಾಡಲಿ. ಆಣೆ ಮಾಡಲಿಕ್ಕೆ ನಾನೂ ನನ್ನ ಕುಟುಂಬ ಸಮೇತವಾಗಿ ಬರುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಸವಾಲು ಹಾಕಿದ್ದಾರೆ. ರಾಮಾಯಣ, ಮಹಾಭಾರತ ಆಗಿದ್ದು, ಮಹಿಳೆಯನ್ನು ಅಪಮಾನ ಮಾಡಿದ್ದಕ್ಕೆ. ಅಲ್ಲಿ ಅಪಮಾನ ಮಾಡಿದ ಎಲ್ಲರಿಗೂ ಶಿಕ್ಷೆ ಆಗಿದೆ. ಇಲ್ಲಿಯೂ ಆಗುತ್ತದೆ ಎಂದಿದ್ದಾರೆ. ಆದರೆ ರವಿ ಆಣೆ ಪ್ರಮಾಣದ ಸವಾಲನ್ನು ಒಪ್ಪಿಕೊಳ್ಳದೇ ಹಿಂದೆ ಸರಿದಿದ್ದಾರೆ. ನ್ಯಾಯಾಲಯದಲ್ಲಿಯೇ ಪ್ರಕರಣ ಇತ್ಯರ್ಥವಾಗಲಿ ಎಂದು ಹೇಳಿದ್ದಾರೆ.

ಇದು ಬಫೂನ್ ಸರ್ಕಾರವಾಗಿದ್ದು, ಇಷ್ಟು ಕೆಟ್ಟದಾಗಿ
ಯಾರೂ ಸರ್ಕಾರ ನಡೆಸಿಲ್ಲ. ಸಿ.ಟಿ.ರವಿ ಅವರಿಗೆ ಹೀಗಾದರೆ ಇನ್ನು ಸಾರ್ವಜನಿಕರ ಪಾಡೇನು ಎಂಬ ಪ್ರಶ್ನೆ ಮೂಡುತ್ತದೆ. ಇದು ರಾಜ್ಯ ಸರ್ಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ. ಅದಕ್ಕಾಗಿ ರಾಜ್ಯಪಾಲರು ಸಂವಿಧಾನವನ್ನು ರಕ್ಷಣೆ ಮಾಡಿ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ರಕ್ಷಣೆ ನೀಡುವಂತೆ ಕೋರಿ ರಾಜ್ಯಪಾಲರಾದ ಥಾವರ್‌ಚಾಂದ್ ಗೆಹಲೋತ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕೆಂಬುದು ನಮ್ಮ ಆಗ್ರಹ ಎಂದರು. ಶಾಸಕ ಸಿ.ಟಿ. ರವಿ ಅವರಿಗೆ ಮಾಡಿದ ಅಪಮಾನದ ಬಗ್ಗೆ ರಾಜ್ಯಪಾಲರಿಗೆ ತಿಳಿಸಲಾಗಿದೆ.

ಸಿ.ಟಿ. ರವಿ ಅವರಿಗೆ ಮುಸ್ಲಿಂ ಉಗ್ರವಾದಿ ಹಾಗೂ ನಕ್ಸಲರಿಂದ ಬೆದರಿಕೆ ಇದೆ. ಹೀಗಿದ್ದರೂ ಅವರನ್ನು ಕಬ್ಬಿನ ಗದ್ದೆಗೆ ಕರೆದುಕೊಂಡು ಹೋಗಿರುವುದು ಅನುಮಾನ ತಂದಿದೆ. ಒಬ್ಬ ಪೊಲೀಸ್ ಅಧಿಕಾರಿ ಸುರಕ್ಷತೆ ದೃಷ್ಟಿಯಿಂದ ಅವರನ್ನು ಗದ್ದೆಗೆ ಕರೆದೊಯ್ಯಲಾಗಿದೆ ಎಂದು ಹೇಳಿದ್ದಾರೆ. ಅಂದರೆ ಪೊಲೀಸ್ ಠಾಣೆ ಸುರಕ್ಷಿತವಲ್ಲ ಎಂದರ್ಥ. ಪೊಲೀಸ್ ಠಾಣೆ ಸುರಕ್ಷಿತವಲ್ಲ ಎಂದು ಈ ಸರ್ಕಾರ ಜನರಿಗೆ ತಿಳಿಸಿದೆ ಎಂದು ಹೇಳಿದರು. ಘಟನೆ ನಡೆದ ಸಂದರ್ಭದಲ್ಲಿ ಪೊಲೀಸ್ ಆಯುಕ್ತರಿಗೆ ನಿರಂತರವಾಗಿ ಪೋನ್ ಕರೆ ಬರುತ್ತಿತ್ತು. ಇವರಿಗೆ ಮುಖ್ಯಮಂತ್ರಿ ಅಥವಾ ಡಿಸಿಎಂ ಕರೆ ಮಾಡುತ್ತಿದ್ದರೇ ಎಂಬುದು ಗೊತ್ತಾಗಬೇಕು. ಇದರ ತನಿಖೆಯನ್ನು ನಿಷ್ಪಕ್ಷಪಾತವಾಗಿ ಮಾಡಬೇಕು ಎಂದು ಆಗ್ರಹಿಸಿದರು.

Leave a Comment